LATEST NEWS
ಬರೋಬ್ಬರಿ 77 ದಿನಗಳ ನಂತರ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಭಕ್ತರು
ಗರ್ಭಗುಡಿ ಸಮೀಪ ಭಕ್ತರಿಗೆ ತೆರಳುವ ಅವಕಾಶ ಇಲ್ಲ
ಉಡುಪಿ ಜೂನ್ 8: ಅನ್ ಲಾಕ್ 1 ರ ನಂತರ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ ಹಿನ್ನಲೆ ದಕ್ಷಿಣ ಭಾರತದ ಪ್ರಸಿದ್ಧ ದೇವಿ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಇಂದು ತೆರೆದಿದೆ. ಬರೋಬ್ಬರಿ 77 ದಿನಗಳ ನಂತರ ತಾಯಿ ಮೂಕಾಂಬಿಕೆ ಭಕ್ತರಿಗೆ ದರ್ಶನ ಕೊಟ್ಟಿದ್ದಾಳೆ.
ಕೊರನಾ ಲಾಕ್ ಡೌನ್ ನಂತರ ಈ ಅನ್ ಲಾಕ್ ಪ್ರಾರಂಭವಾಗಿದ್ದು ಅನ್ ಲಾಕ್ 1 ಮಾರ್ಗ ಸೂಚಿಗಳ ಪ್ರಕಾರ ಕೇಂದ್ರ ಸರಕಾರ ಧಾರ್ಮಿಕ ಕೇಂದ್ರಗಳನ್ನು ತೆರಯಲು ಅನುಮತಿ ನೀಡಿದೆ. ಈ ಹಿನ್ನಲೆ ಜೂನ್ 8 ಅಂದರೆ ಇಂದಿನಿಂದ ರಾಜ್ಯಾದ್ಯಂತ ಬಹುತೇಕ ದೇವಸ್ಥಾನಗಳಲ್ಲಿ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿಯ ಪ್ರಸಿದ್ದ ದೇವಿ ಕ್ಷೇತ್ರ ಕೊಲ್ಲೂರಿನಲ್ಲೂ ಇಂದು ದೇವರ ದರ್ಶನ ಅವಕಾಶ ಕಲ್ಪಿಸಲಾತ್ತು. ಇಂದು ಬೆಳಿಗ್ಗೆ 5.30 ಕೊಲ್ಲೂರಿನ ಸ್ಥಳೀಯ ಭಕ್ತರು ಮೂಕಾಂಬಿಕೆಯನ್ನು ಕಣ್ತುಂಬಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು. ಸರ್ಕಾರದ ನಿಯಮದಂತೆ ಭಕ್ತರಿಗೆ ಕೈಕಾಲು ತೊಳೆಯುವ, ಸ್ಯಾನಿಟೈಸ್ ಮಾಡಿ ಮತ್ತು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಸಿಬ್ಬಂದಿ ಭಕ್ತರನ್ನು ದೇವಸ್ಥಾನದ ಒಳಗೆ ಬಿಟ್ಟರು. ದೇವಸ್ಥಾನದ ಪ್ರಾಂಗಣದ ತುಂಬೆಲ್ಲಾ ಬ್ಯಾರಿಕೇಡ್ ವ್ಯವಸ್ಥೆಯನ್ನು ಮಾಡಲಾಗಿತ್ತು.
ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ದೇಗುಲದ ಗರ್ಭಗುಡಿಯ ಸಮೀಪ ಭಕ್ತರಿಗೆ ಹೋಗುವ ಅವಕಾಶ ಇರಲಿಲ್ಲ. ಧ್ವಜಸ್ತಂಭದ ಸಮೀಪ ನಿಂತು ದೇವರನ್ನು ದರ್ಶನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಗರ್ಭಗುಡಿಯ ಸಮೀಪ ಪ್ರವೇಶಿಸಬೇಕಾದರೆ ಈ ಹಿಂದಿನ ನಿಯಮದಂತೆ ಶರ್ಟ್ ಮತ್ತು ಬನಿಯನ್ ಕಳಚಿ ಒಳ ಪ್ರವೇಶಿಸಬೇಕಿತ್ತು.
ಹೊಸ ನಿಯಮದ ಪ್ರಕಾರ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ಇಲ್ಲದ ಕಾರಣ ಧ್ವಜಸ್ತಂಭದ ಕೆಳಭಾಗದಲ್ಲಿ ನಿಂತು ದೇವಿಯ ದರ್ಶನ ಮಾಡಿ ಮುಂದೆ ಸಾಗಿದರು. ಕೊಲ್ಲೂರು ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಯಾವುದೇ ಗುಡಿಗಳಿಗೆ ಭೇಟಿ ಕೊಡುವ ಅವಕಾಶ ಭಕ್ತರಿಗೆ ಸದ್ಯಕ್ಕಿಲ್ಲ. ಮೂಕಾಂಬಿಕಾ ದೇವಿಯ ದರ್ಶನ ಮಾಡಿ ನೇರವಾಗಿ ದೇವಸ್ಥಾನದ ಪ್ರಾಂಗಣದ ಒಳಗೆ ಹಾಕಿದ ಬ್ಯಾರಿಕೇಡ್ ಮೂಲಕ ತೆರಳಿ ಆನೆ ಬಾಗಿಲ ಮೂಲಕ ದೇವಸ್ಥಾನದ ಹೊರಗೆ ತೆರಳುವ ವ್ಯವಸ್ಥೆಯನ್ನು ಮಾಡಲಾಗಿದೆ.
ಮಧ್ಯಾಹ್ನದವರೆಗೆ 5 ಗಂಟೆ, ಮಧ್ಯಾಹ್ನದ ನಂತರ 3 ಗಂಟೆಗಳ ಕಾಲ ದೇವಸ್ಥಾನ ತೆರೆದಿರುತ್ತದೆ ಎಂದು ದೇವಸ್ಥಾನದ ಇಒ ಅರವಿಂದ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 5.30 ರಿಂದ 7.30, 10.30 ರಿಂದ 1.30ವರೆಗೆ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3 ರಿಂದ ಸಂಜೆ 6 ರ ವರೆಗೆ ದೇವಿಯನ್ನು ನೋಡುವ ಅವಕಾಶ ಕಲ್ಪಿಸಲಾಗಿದೆ. ಮುಂದಿನ ಬದಲಾವಣೆ ತನಕ ಈ ಅವಕಾಶ ಕಲ್ಪಿಸಲಾಗಿದೆ.
You must be logged in to post a comment Login