ಉಡುಪಿ ನವೆಂಬರ್ 05 : ಉಡುಪಿ ನಗರದಲ್ಲಿ ಜನವರಿ 2026 ರ ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆ, ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ, ಕಾನೂನು ಸುವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೊರ ಜಿಲ್ಲೆ, ರಾಜ್ಯ, ದೇಶ-ವಿದೇಶಗಳಿಂದ ಹೆಚ್ಚಿನ ಭಕ್ತರು ಉಡುಪಿ ನಗರಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಾಹನಗಳ ಸುಗಮ ಸಂಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಜನರ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಶ್ರೀಕೃಷ್ಣ ಮಠದ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದರು.


ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ರಸ್ತೆಗಳ ದುರಸ್ತಿಯನ್ನು ಗುಣಮಟ್ಟದೊಂದಿಗೆ ಕೈಗೊಳ್ಳಬೇಕು. ದಾರಿದೀಪಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದ ಅವರು, ನಗರದ ಶುಚಿತ್ವ ಕಾಪಾಡಲು ಹೆಚ್ಚು ಪೌರ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಪೌರಾಯುಕ್ತರಿಗೆ ಸೂಚನೆ ನೀಡಿದರು. ಮಠದ ಆವರಣದಲ್ಲಿ ಜನಜಂಗುಳಿಯಾಗಿ ಜನರ ಸಂಚಾರಕ್ಕೆ ತೊಂದರೆ ಉಂಟಾಗದAತೆ ಅಗತ್ಯವಿರುವಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಬಂದೋಬಸ್ತ್ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವುದರೊಂದಿಗೆ ಕಂಟ್ರೋಲ್ ರೂಮ್‌ಗಳು ದಿನದ ಇಪ್ಪನಾಲ್ಕು ಗಂಟೆ ಕಾರ್ಯಾಚರಿಸುವಂತೆ ನೋಡಿಕೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

READ THIS … ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬ್ರೆಜಿಲ್ ಮಾಡೆಲ್ ಪೋಟೋ ಬಳಸಿ 22 ಬಾರಿ ಮತದಾನ – ಚುನಾವಣಾ ಆಯೋಗದ ಬೆನ್ನಹಿಂದೆ ಬಿದ್ದ ರಾಹುಲ್ ಗಾಂಧಿ

 

ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಶ್ರೀಕೃಷ ಮಠದ ಆವರಣದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ತಂಡದ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ರಚಿಸುವುದರೊಂದಿಗೆ ಆಂಬುಲೆನ್ಸ್ ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರ್ಯಾಯ ಮಹೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಸೌಲಭ್ಯವನ್ನು ಕಲ್ಪಿಸಬೇಕು ಎಂದ ಅವರು, ಸ್ಥಳೀಯ ಪ್ರವಾಸಿ ತಾಣಗಳನ್ನು ಭೇಟಿ ನೀಡಲು ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ವ್ಯವಸ್ಥೆ ಮಾಡಬೇಕು ಎಂದರು.
ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು. ಅಗ್ನಿಶಾಮಕ ಹೆಚ್ಚುವರಿ ವಾಹನಗಳನ್ನು ನಿಯೋಜಿಸಬೇಕು. ಪರ್ಯಾಯೋತ್ಸವ ಅಂಗವಾಗಿ ವಾಹನಗಳಲ್ಲಿ ಹೊರೆ ಕಾಣಿಕೆಗಳು ಬರಲಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಗಳಾಗದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

READ THIS ….ಕದ್ರಿ ಪಾರ್ಕ್‌ಗೆ ಬರಬೇಕಾದ್ರೆ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರ ಆಕ್ರೋಶ

ಪುರ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಾಲ ತಂಡಗಳು, ಸ್ಥಬ್ಧ ಚಿತ್ರಗಳು ಭಾಗವಹಿಸಲಿದ್ದು, ಇವುಗಳು ಶಿಸ್ತುಬದ್ಧವಾಗಿ ಸಾಗುವ ರೀತಿ ನೋಡಿಕೊಳ್ಳಬೇಕು ಎಂದ ಅವರು, ಮೆರವಣಿಗೆ ಸಾಗುವ ದಾರಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿದ್ದಲ್ಲಿ ಅವುಗಳನ್ನು ಗುರುತಿಸುವುದರೊಂದಿಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜನ ಸಂದಣಿ ಹೆಚ್ಚಾಗಲಿರುವುದರಿಂದ ಯಾವುದೇ ಅವಘಡಗಳು ಸಂಭವಿಸದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ವಾಹನಗಳು ಹೆಚ್ಚು ಆಗಮಿಸುವ ಸಾಧ್ಯತೆಗಳಿರುವ ಹಿನ್ನೆಲೆ, ಅವುಗಳಿಗೆ ಸೂಕ್ತ ಪಾರ್ಕಿಂಗ್ ಸ್ಥಳ ನಿಗಧಿಪಡಿಸಬೇಕು. ಊರ ಹಬ್ಬದ ರೀತಿಯಲ್ಲಿ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

Share Information