LATEST NEWS
ಉಡುಪಿ ಬಿಲ್ಲವ ಸಂಘದ ವಿರುದ್ದ ಅವಹೇಳನ – ಉಡುಪಿ ಎಸ್ಪಿಗೆ ದೂರು
ಉಡುಪಿ, ಜನವರಿ 24: ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠೆ ದಿನ ರಾಮಧ್ವಜ ಆಳವಡಿಸದ ಹಿನ್ನಲೆ ಉಡುಪಿ ಬನ್ನಂಜೆ ನಾರಾಯಣಗುರು ಮಂದಿರಕ್ಕೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ವಿಡಿಯೋ ಮಾಡಿದ ಅನಾಮಿಕ ವ್ಯಕ್ತಿ ವಿರುದ್ಧ ಮಂದಿರದ ಆಡಳಿತ ಮಂಡಳಿಯಿಂದ ಎಸ್ಪಿಗೆ ದೂರು ನೀಡಿದರು.
ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲ ಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಮಾಡಿರುವ ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಸಂಘದ ನಿಯೋಗ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರಿಗೆ ಮನವಿ ಸಲ್ಲಿಸಿತು.
ಬನ್ನಂಜೆ ನಾರಾಯಣ ಗುರು ಸಂಘ 80 ವರ್ಷದಿಂದ ಸಾಮಾಜಿಕ ಚಟುವಟಿಕೆ ಮಾಡುತ್ತಿದೆ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡುವ ಕೆಲಸ ಮಾಡುತ್ತಿದೆ. ರಾಮಮಂದಿರ ಪ್ರತಿಷ್ಠಾಪನೆ ದಿನ ನಾವು ವಿಶೇಷ ಪೂಜೆ ನೆರವೇರಿಸಿದ್ದೇವೆ. ಆದರೆ ಮಂದಿರದ ಆವರಣದಲ್ಲಿ ಧ್ವಜ ಮಾತ್ರ ಅಳವಡಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಎಸ್ಪಿ ಅರುಣ್ ಮಾತನಾಡಿ, ಬನ್ನಂಜೆ ನಾರಾಯಣ ಗುರು ಮಂದಿರದ ಆಡಳಿತ ಮಂಡಳಿ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ. ದೂರಿನ ಆಧಾರದ ಮೇಲೆ ತಾಂತ್ರಿಕವಾಗಿ ತನಿಖೆ ನಡೆಸುತ್ತೇವೆ. ಈ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಎಫ್ಐಆರ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
You must be logged in to post a comment Login