Connect with us

    LATEST NEWS

    ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನಕ್ಕೆ ಪ್ರಯತ್ನ : ಪ್ರಸನ್ನ ಹೆಚ್.

    ಉಡುಪಿ, ಫೆಬ್ರವರಿ 16 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡುವ ಮೂಲಕ , ಗರಿಷ್ಠ ಪ್ರಮಾಣದ ದಾಖಲೆಯ ಮತದಾನ ನಡೆಯುವಂತಾಗಲೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕರಿ ಪ್ರಸನ್ನ ಹೆಚ್ ಹೇಳಿದರು.


    ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಇಲಾಖೆಗಳು ತಮ್ಮ ದೈನಂದಿನ ಕಾರ್ಯಕ್ರಮಗಳಲ್ಲಿ ಮತದಾನದ ಮಹತ್ವ ಕುರಿತ ಕಾರ್ಯಕಮ್ರಗಳನ್ನು ಜೋಡಣೆ ಮಾಡಿಕೊಳ್ಳುವದರ ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರದ ಬಳಕೆ, ವಿವಿಪ್ಯಾಟ್ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವಂತೆ ಸೂಚನೆ ನೀಡಿದರು.

    ಜಿಲ್ಲೆಯ ಎಲ್ಲಾ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವುದರ ಜೊತೆಗೆ ಎಲ್ಲಾ ಶಾಲಾ ಕಾಲೆಜುಗಳಲ್ಲಿನ ಮತದಾರರ ಸಾಕ್ಷರತಾ ಕ್ಲಬ್ ಗಳಲ್ಲಿ ಸಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಿಡಿಪಿಐ ಮತ್ತು ಡಿಡಿಪಿಯು ಅವರಿಗೆ ಮತ್ತು ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿರುವ ಚುನಾವ್ ಪಾಠಾಶಾಲೆಗಳಲ್ಲಿ ಸಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದವರ ಹಾಡಿಗಳಲ್ಲಿ ಮತದಾನ ಯಂತ್ರದ ಬಳಕೆ ಕುರಿತು ಹೆಚ್ಚು ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆ ಸಮುದಾಯದ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು. ಚುನಾವಣಾ ಆಯೋಗವು ಪ್ರತೀ ಜಿಲ್ಲೆಗೆ ಪ್ರತ್ಯೇಕವಾಗಿ ಜಿಲ್ಲೆಯ ಥೀಮ್ ಬಳಸಿ ಒಂದು ಮತಗಟ್ಟೆಯನ್ನು ನಿರ್ಮಿಸುವಂತೆ ತಿಳಿಸಿದ್ದು , ಅದರಂತೆ ಜಿಲ್ಲೆಯಲ್ಲಿ ಯಕ್ಷಗಾನ ಅಥವಾ ಕಂಬಳ ವನ್ನು ಬಿಂಬಿಸುವ ರೀತಿಯಲ್ಲಿ ಮತಗಟ್ಟೆಯನ್ನು ಅಲಂಕರಿಸಲು ಮತ್ತು ಸ್ಥಳೀಯ ನೈಸರ್ಗಿಕ ಪರಿಕರಗಳನ್ನು ಬಳಸಿ ಚಪ್ಪರ ಹಾಕಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

    ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ.78.36 ಮತದಾನವಾಗಿದ್ದು, ಇದಕ್ಕಿಂತಲೂ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸ್ವೀಪ್ ಸಮಿತಿಯ ಸದಸ್ಯರು ಅಧ್ಯಯನ ನಡೆಸಿ, ಕಡಿಮೆ ಮತದಾನವಾಗಿರುವುದಕ್ಕೆ ಕಾರಣಗಳು ಮತ್ತು ಈ ಬಾರಿ ಅಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ನೀಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರಕಾರಿ ಮತ್ತು ಖಾಸಗಿ ಜಾಹೀರಾತು ಫಲಕಗಳ ಸಮಗ್ರ ವಿವರಗಳನ್ನು ಸಂಗ್ರಹಿಸುವಂತೆ ಮತ್ತು ಚುನಾವಣೆ ಘೋಷಣೆಯಾದ 24 ಗಂಟೆಯ ಒಳಗೆ ಆ ಫಲಕಗಳಲ್ಲಿ ಸ್ವೀಪ್ ಕುರಿತು ಜಾಹೀರಾತು ಅಳವಡಿಸಲು ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ 1111 ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಪರಿಶೀಲನೆ ನಡೆಸುವಂತೆ ಹಾಗೂ ಸ್ವೀಪ್ ಕಾರ್ಯಕ್ರಮದಲ್ಲಿ ವಿನೂತನ ಮತ್ತು ಆಕರ್ಷಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಮತ್ತು ವಿಶೇಷವಾಗಿ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡಲು ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಅತ್ಯಂತ ದೊಡ್ಡ ಹಬ್ಬವಾಗಿದ್ದು , ಇದನ್ನು ಮತದಾರರು ಸಂಭ್ರಮದ ರೀತಿಯಲ್ಲಿ ಆಚರಿಸಲು ಅನುಕೂಲವಾಗುವಂತೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಹೇಳಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply