ಬೆಳ್ತಂಗಡಿ, ಮಾರ್ಚ್ 29: ಬೈಕ್ ಸ್ಕೀಡ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರನಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ–ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗ ಮಾ.28ರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ, ಚಂದ್ರಶೇಖರ್ ಅವರ ಪುತ್ರ ಹಾಗೂ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ನಿತೇಶ್ (19) ಎಂದು ಗುರುತಿಸಲಾಗಿದೆ.
ಈ ಅಪಘಾತದಲ್ಲಿ ಬೈಕ್ ಸವಾರನಾಗಿದ್ದ ಪುತ್ತೂರು ನಿವಾಸಿ ಲಿಖಿತ್ (20) ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಕೆಟಿಎಂ ಕಂಪನಿಯ ಬೈಕ್ ನಿಯಂತ್ರಣ ತಪ್ಪಿ ಸ್ಕೀಡ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸಹಸವಾರನಾಗಿದ್ದ ನಿತೇಶ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ಉಜಿರೆಯ ಖಾಸಗಿ ಕಾಲೇಜಿನವರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾತ್ರಿ ಸುಮಾರು 12.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.