LATEST NEWS
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಬಂದ್

ಮಂಗಳೂರು ಮೇ 02: ಬಜ್ಪೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಸಂದರ್ಭ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಮೇ ನಿಷೇಧಾಜ್ಞೆ ಕೋರಿ ಮಂಗಳೂರು ನಗರ ವಿಶೇಷ ವಿಭಾಗ ಇನ್ಸ್ಪೆಕ್ಟರ್ ಕಮಿಷನರ್ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ 153ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೇ 2ರ ಬೆಳಗ್ಗೆ 6.00ರಿಂದ ಮೇ 6ರ ಬೆಳಗ್ಗೆ 6.00ರವರೆಗೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.

ಈ ನಡುವೆ ಪೊಲೀಸ್ ಕಮಿಷನರ್ ಅವರ ಮನವಿ ಮೇರೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಮಾದರಿಯ ಮದ್ಯ ಮಾರಾಟ ಕೇಂದ್ರಗಳನ್ನು ದಿನಾಂಕ:02.05.2025 ರಂದು ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ: 04.05.2025ರ ಬೆಳಿಗ್ಗೆ 06:00 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಇನ್ನೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನಲೆ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದು ನಿಷೇಧಿಸಲಾಗಿದೆ. ಯಾವುದೇ ರೀತಿಯ ಶಸ್ತ್ರಗಳು, ದೊಣ್ಣೆಗಳು, ಮಾರಕಾಯುಧಗಳು ಸಾಗಾಟ ಮಾಡುವುದು ನಿಷೇಧಿಸಲಾಗಿದೆ. ಪಟಾಕಿಗಳನ್ನುಸಿಡಿಸುವುದು, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಯಾರದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ ಮಾಡುವುದು, ಸರಕಾರಿ ಸಂಸ್ಥೆಗಳು, ಸಂಘಟನೆಗಳು, ಅಧಿಕಾರಿ ಸಿಬ್ಬಂದಿ ನಿಂದನೆ, ಅವಹೇಳನಕಾರಿ ಘೋಷಣೆ, ಪ್ರಚೋದನಾಕಾರಿ ಭಾಷಣ, ಗಾಯನ ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಪ್ರದೇಶದಲ್ಲಿ ಸರಕಾರದ ಆದೇಶದಂತೆ ನಡೆಯುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಪೊಲೀಸ್ಕಮಿಷನರ್ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.